ಎಸ್ವೈಎಸ್ ರಾಜ್ಯ ಸಮಿತಿಯ ವತಿಯಿಂದ ಹಮ್ಮಿಕೊಳ್ಳಲಾದ ಮಾದರಿ ಮದುವೆ ಅಭಿಯಾನದ ಸಮಾರೋಪ ಸಮ್ಮೇಳನವು ಮೇ 2ರ ಶನಿವಾರದಂದು ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಈ ಮಹತ್ವದ ಕಾರ್ಯಕ್ರಮದಲ್ಲಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖುನಾ ಸುಲ್ತಾನುಲ್ ಉಲಮಾ ಎ ಪಿ ಉಸ್ತಾದ್ ಅವರು ಭಾಗವಹಿಸಲಿದ್ದು, ಝೈನುಲ್ ಉಲಮಾ ಮಾಣಿ ಉಸ್ತಾದರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಶೈಖುನಾ ಪೇರೋಡ್ ಉಸ್ತಾದರು ಮುಖ್ಯ ಭಾಷಣಕಾರರಾಗಿ ಉಪಸ್ಥಿತರಿರಲಿದ್ದು, ವಿವಿಧ ಸಾದಾತುಗಳು, ಉಲಮಾ-ಉಮರಾ ನಾಯಕರು ಹಾಗೂ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಸಮ್ಮೇಳನದ ಅಂಗವಾಗಿ ಅಂದು ಮಧ್ಯಾಹ್ನ 3 ಗಂಟೆಗೆ ದರ್ಬೆಯಿಂದ ಬೃಹತ್ ಕಾಲ್ನಡಿಗೆ ಜಾಗೃತಿ ಜಾಥಾ ಹೊರಡಲಿದೆ. ಈ ಜಾಥಾವು ಪುತ್ತೂರಿನ ಮುಖ್ಯ ರಸ್ತೆಯ ಮೂಲಕ ಸಾಗಿ ಸಮ್ಮೇಳನ ನಡೆಯುವ ಕಿಲ್ಲೆ ಮೈದಾನವನ್ನು ತಲುಪಲಿದೆ. ಜಿಲ್ಲೆಯ ಪ್ರಸಿದ್ಧ ದಫ್ ತಂಡಗಳು, ಸ್ಕೌಟ್ ಮತ್ತು ಎಸ್ವೈಎಸ್ ಇಸಾಬಾ ತಂಡಗಳು ಈ ಮೆರವಣಿಗೆಯಲ್ಲಿ ಭಾಗವಹಿಸಿ ವಿಶೇಷ ಮೆರಗು ನೀಡಲಿವೆ.



ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯ ಸುನ್ನಿ ಸಂಘ ಕುಟುಂಬದ ಎಲ್ಲಾ ನಾಯಕರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಯೂಸುಫ್ ಸಯೀದ್ ಪುತ್ತೂರು ಅವರು ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.








