ಸುಳ್ಯ ತಾಲೂಕಿನ ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೂಡಲೇ ಖಾಯಂ ವೈದ್ಯಾಧಿಕಾರಿಯೊಬ್ಬರನ್ನು ನೇಮಕ ಮಾಡುವಂತೆ ತಾಲೂಕು ಕೆ.ಡಿ.ಪಿ ಸದಸ್ಯ ಅಶ್ರಫ್ ಗುಂಡಿ ಅವರು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ಹಿಂದೆ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯಾಧಿಕಾರಿಯವರು ಇತ್ತೀಚೆಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ನಿರ್ಗಮಿಸಿದ್ದಾರೆ. ಇದರಿಂದಾಗಿ ಸದ್ಯ ಆರೋಗ್ಯ ಕೇಂದ್ರದಲ್ಲಿ ಯಾವುದೇ ವೈದ್ಯರಿಲ್ಲದೆ, ಚಿಕಿತ್ಸೆಗಾಗಿ ಬರುವ ಸ್ಥಳೀಯ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನೂರಾರು ರೋಗಿಗಳು ಪ್ರತಿದಿನ ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಗ್ರಾಮೀಣ ಭಾಗದ ಬಡ ಜನರಿಗೆ ಸಂಜೀವಿನಿಯಾಗಿರುವ ಈ ಆರೋಗ್ಯ ಕೇಂದ್ರದ ಪರಿಸ್ಥಿತಿಯನ್ನು ಮನಗಂಡು, ಸಾರ್ವಜನಿಕರ ಹಿತದೃಷ್ಟಿಯಿಂದ ಸರಕಾರ ತಕ್ಷಣವೇ ಸ್ಪಂದಿಸಬೇಕು. ಅರಂತೋಡು ಕೇಂದ್ರಕ್ಕೆ ಖಾಯಂ ವೈದ್ಯರನ್ನು ನಿಯೋಜಿಸಿ ಸಾರ್ವಜನಿಕರಿಗೆ ಸೂಕ್ತ ವೈದ್ಯಕೀಯ ಸೇವೆ ಸಿಗುವಂತೆ ಮಾಡಬೇಕು ಎಂದು ಅಶ್ರಫ್ ಗುಂಡಿ ಅವರು ಆರೋಗ್ಯ ಸಚಿವರನ್ನು ಪತ್ರದ ಮೂಲಕ ಒತ್ತಾಯಿಸಿದ್ದಾರೆ.



