ಸುಳ್ಯದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಇನ್ಫಾರ್ಮೇಷನ್ ಸೆಂಟರ್ ಮತ್ತು ಮುಸ್ಲಿಮ್ ಯೂತ್ ಫೆಡರೇಷನ್ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಕಾರ್ಯಾಗಾರ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದ ಆರಂಭದಲ್ಲಿ ಮುಸ್ಲಿಮ್ ಯೂತ್ ಫೆಡರೇಷನ್ ಇದರ ಸುಳ್ಯ ತಾಲೂಕು ಅಧ್ಯಕ್ಷರಾದ ಉಮ್ಮರ್ ಕೆ ಎಸ್ ಅವರು ಆಗಮಿಸಿದ ಸರ್ವ ಅತಿಥಿ ಗಣ್ಯರನ್ನು ಆದರದಿಂದ ಸ್ವಾಗತಿಸಿದರು. ಶಾಸಕಿ ಭಾಗೀರಥಿ ಮುರುಳ್ಯ, ತಾಲೂಕು ಪಂಚಾಯತ್ ಆಡಳಿತಾಧಿಕಾರಿ ರಾಜಣ್ಣ ಮತ್ತು ಸೂಡಾ ಅಧ್ಯಕ್ಷರಾದ ಮುಸ್ತಾಫ ಕೆ ಎಂ ಅವರು ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು. ಇದೇ ಸಂದರ್ಭದಲ್ಲಿ ಇತ್ತೀಚಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರನ್ನು ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಾಗಾರದಲ್ಲಿ ಸುಳ್ಯ ಕೆ ಎ ನಾಲೆಡ್ಜ್ ಸೆಂಟರ್ ನ ಕಮಾಲ್ ಅವರು ಭಾಗವಹಿಸಿ, ವಿದ್ಯಾರ್ಥಿಗಳಿಗೆ ಸರಕಾರದಿಂದ ಸಿಗುವ ವಿವಿಧ ಶೈಕ್ಷಣಿಕ ಸವಲತ್ತುಗಳು ಮತ್ತು ಯೋಜನೆಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ಮುಂದುವರಿದು, ಪುತ್ತೂರು ಕಮ್ಯುನಿಟಿ ಸೆಂಟರ್ ನ ಹನೀಫ್ ಪುತ್ತೂರು ಅವರು ವಿದ್ಯಾರ್ಥಿಗಳಿಗೆ ಮುಂದಿನ ಉನ್ನತ ಶಿಕ್ಷಣದ ಹಾದಿ ಮತ್ತು ಭವಿಷ್ಯದ ಅವಕಾಶಗಳ ಕುರಿತು ಸೂಕ್ತ ಮಾರ್ಗದರ್ಶನ ನೀಡಿದರು.
ವೇದಿಕೆಯಲ್ಲಿ ಪ್ರಮುಖರಾದ ಶರೀಫ್ ಕಂಠಿ, ಸಿದ್ದೀಕ್ ಕೊಕ್ಕೋ, ಉನೈಸ್ ಪೆರಾಜೆ, ರಝಾಕ್ ರಾಜಧಾನಿ, ಬಾತಿಷಾ ಕನಕಮಜಲು ಹಾಗೂ ಪುತ್ತೂರು ಕಮ್ಯುನಿಟಿ ಸೆಂಟರ್ ನ ಇಮ್ತಿಯಾಝ್ ಮತ್ತು ಇಕ್ಬಾಲ್ ಸುಣ್ಣಮೂಲೆ ಉಪಸ್ಥಿತರಿದ್ದರು. ಸಾಧಕ ವಿದ್ಯಾರ್ಥಿಗಳ ಪೋಷಕರು ಮತ್ತು ಸಾರ್ವಜನಿಕರು ಈ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಯಶಸ್ವಿಗೊಳಿಸಿದರು.

