



ಶಿಕ್ಷಕ ವೃತ್ತಿ ಕೇವಲ ಪಾಠ ಬೋಧಿಸುವ ಕೆಲಸವಲ್ಲ; ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಅವರಲ್ಲಿ ಆತ್ಮವಿಶ್ವಾಸ ತುಂಬಿ, ಉತ್ತಮ ಭವಿಷ್ಯದತ್ತ ಮುನ್ನಡೆಸುವ ಜವಾಬ್ದಾರಿಯೂ ಹೌದು. ಈ ಜವಾಬ್ದಾರಿಯನ್ನು ನಿಷ್ಠೆ ಮತ್ತು ಬದ್ಧತೆಯಿಂದ ನಿರ್ವಹಿಸುತ್ತಾ ಬಂದಿರುವ ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಮರಿಯಾ ಅಶ್ರಫ್ ಅವರ ಸೇವೆಗೆ ಇದೀಗ ಜಿಲ್ಲಾ ಮಟ್ಟದ ಗೌರವ ಸಂದಿದೆ.
ಶಿಕ್ಷಣ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ನಿರಂತರ, ಪರಿಣಾಮಕಾರಿ ಹಾಗೂ ಶ್ಲಾಘನೀಯ ಸೇವೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ಗೆ ಮರಿಯಾ ಅಶ್ರಫ್ ಅವರನ್ನು ಆಯ್ಕೆ ಮಾಡಲಾಗಿದೆ. ಮಂಗಳೂರಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಗುವುದು.
ಶಿಕ್ಷಣದ ಮೇಲಿನ ಆಸಕ್ತಿಯಿಂದ ಶಿಕ್ಷಕ ವೃತ್ತಿಯತ್ತ…
ಸುಳ್ಯ ತಾಲೂಕಿನ ಗೂನಡ್ಕದ ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು, ಆರಂತೋಡಿನ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢ ಹಾಗೂ ಪದವಿಪೂರ್ವ ಶಿಕ್ಷಣ ಪೂರ್ಣಗೊಳಿಸಿದರು. ಬಳಿಕ ಮಂಗಳೂರಿನ ಬಲ್ಮಠದಲ್ಲಿರುವ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಿ.ಎಡ್. ತರಬೇತಿ ಪಡೆದು ಶಿಕ್ಷಕ ವೃತ್ತಿಗೆ ಸಜ್ಜಾದರು.
ಶಿಕ್ಷಕಿಯಾಗಿ ವೃತ್ತಿ ಜೀವನ ಆರಂಭಿಸಿದ ಮರಿಯಾ ಅಶ್ರಫ್ ಅವರು ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣದಲ್ಲಿ ಐದು ವರ್ಷ ಹಾಗೂ ತುರ್ಕಳಿಕೆಯಲ್ಲಿ ಐದು ವರ್ಷ ಸೇವೆ ಸಲ್ಲಿಸಿದರು. ವಿವಿಧ ಶಾಲೆಗಳಲ್ಲಿ ಸೇವೆ ಸಲ್ಲಿಸುವ ಸಂದರ್ಭದಲ್ಲಿ ಬೋಧನೆಯ ಜೊತೆಗೆ ವಿದ್ಯಾರ್ಥಿಗಳೊಂದಿಗೆ ಆತ್ಮೀಯ ಸಂಬಂಧ ಬೆಳೆಸಿಕೊಂಡು, ಅವರ ಶೈಕ್ಷಣಿಕ ಪ್ರಗತಿಗೆ ವಿಶೇಷ ಗಮನ ನೀಡಿದರು.
ಸಾಮೆತ್ತಡ್ಕದಲ್ಲಿ ಹೊಸ ಅಧ್ಯಾಯ
2019–20ನೇ ಸಾಲಿನಲ್ಲಿ ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕರ್ತವ್ಯಕ್ಕೆ ಹಾಜರಾದ ಬಳಿಕ ಅವರ ಶೈಕ್ಷಣಿಕ ಸೇವೆಗೆ ಮತ್ತೊಂದು ಮಹತ್ವದ ಅಧ್ಯಾಯ ಆರಂಭವಾಯಿತು.
ವಿದ್ಯಾರ್ಥಿಗಳ ಕಲಿಕೆಯನ್ನು ಸುಲಭ ಹಾಗೂ ಆಸಕ್ತಿದಾಯಕವಾಗಿಸುವ ನಿಟ್ಟಿನಲ್ಲಿ ಕ್ರಿಯಾಶೀಲ ಬೋಧನಾ ವಿಧಾನಗಳನ್ನು ಅಳವಡಿಸಿಕೊಂಡ ಅವರು, ಮಕ್ಕಳಲ್ಲಿರುವ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಸದಾ ಮುಂಚೂಣಿಯಲ್ಲಿದ್ದಾರೆ.
ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗದೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಆದ್ಯತೆ ನೀಡುವುದು ಅವರ ಬೋಧನಾ ವಿಧಾನದ ಪ್ರಮುಖ ವೈಶಿಷ್ಟ್ಯವಾಗಿದೆ. ಶಾಲೆಯ ಶೈಕ್ಷಣಿಕ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡು, ಶಾಲೆಯ ಅಭಿವೃದ್ಧಿಗೂ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.
ಸೇವೆಗೆ ಸಿಕ್ಕ ಸಾರ್ಥಕ ಮನ್ನಣೆ

